ಉತ್ತರಪ್ರದೇಶದ ಅಲಹಾಬಾದ್’ನಲ್ಲಿ ಬಿಎಸ್ಪಿ ಮುಖಂಡನಿಗೆ ಗುಂಡಿಟ್ಟು ಹತ್ಯೆ
ಅಲಹಾಬಾದ್, ಮಾ.20 – ಬಹುಜನ ಸಮಾಜ ಪಕ್ಷದ ಮುಖಂಡ ಮಹಮದ್ ಶಮಿ(60) ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ನಿನ್ನೆ ತಡರಾತ್ರಿ ಉತ್ತರಪ್ರದೇಶದ ಅಲಹಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಲಹಾಬಾದ್ನ ಮಾವು ಅಲ್ಮಾ ಪ್ರದೇಶದಲ್ಲಿರುವ ಶಮಿ ಅವರ ನಿವಾಸದ ಮುಂದೆಯೇ ಗುಂಡು ಹಾರಿಸಿ ಪರಾರಿಯಾದರು. ಐದು ಗುಂಡುಗಳು ಅವರ ದೇಹವನ್ನು ಹೊಕ್ಕಿದ್ದು ಕುಸಿದು ಬಿದ್ದ ಅವರು ಸ್ಥಳದಲ್ಲೇ ಮೃತಪಟ್ಟರು.
ಸಮಾಜವಾದಿ ಪಕ್ಷದಲ್ಲಿದ್ದ ಅವರು ವಿಧಾನಸಭೆ ಚುನಾವಣೆಗೆ ಮುನ್ನ ಬಹುಜನ ಸಮಾಜ ಪಕ್ಷ ಸೇರ್ಪಡೆಯಾಗಿದ್ದರು. ಬಿಎಸ್ಪಿ ಹುರಿಯಾಳಾಗಿ ಸ್ಪರ್ಧಿಸಿದ್ದ ಅವರು ಎಸ್ಪಿ ಅಭ್ಯರ್ಥಿಯಿಂದ ಪರಾಭವಗೊಂಡಿದ್ದರು. ಶಮಿ ಹತ್ಯೆಯಿಂದಾಗಿ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳೀಯ ಬಿಎಸ್ಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು. ಕೃತ್ಯವನ್ನು ಬಿಎಸ್ಪಿ ನಾಯಕಿ ಮಾಯಾವತಿ ಖಂಡಿಸಿದ್ದಾರೆ.
ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಶಮಿ ಹತ್ಯೆ ನಡೆದಿದೆ. ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ರಾಜಕೀಯ ವೈಷಮ್ಯದಿಂದ ಈ ಕಗ್ಗೊಲೆ ನಡೆದಿರುವ ಸಾಧ್ಯತೆ ಇದೆ. ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಹಂತರ ಸೆರೆಗೆ ವ್ಯಾಪಕ ಬಲೆ ಬೀಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS