ಎರಡೂ ರಾಜ್ಯಗಳ ಪರಿಸ್ಥಿತಿ ಅವಲೋಕನ ನಡೆಸಲು ಕೇಂದ್ರ ಸರ್ಕಾರಕ್ಕೆ ಪತ್ರ
ಬೆಂಗಳೂರು, ಸೆ.8-ಕರ್ನಾಟಕದಲ್ಲಿನ ಪರಿಸ್ಥಿತಿಯ ಕುರಿತು ಅವಲೋಕನ ನಡೆಸಲು ತಜ್ಞರ ತಂಡವನ್ನು ಕಳಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕೇಂದ್ರ ಸರ್ಕಾರ ತಂಡವನ್ನು ಕಳಿಸಿದರೆ ಅದು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಿಗೆ ಭೇಟಿ ನೀಡಲಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರು ಈ ಕುರಿತು ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದ್ದಾರೆ. ಆದಷ್ಟು ಬೇಗ ಕರ್ನಾಟಕದಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಲು ತಂಡವನ್ನು ಕಳಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಬುಧವಾರ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನಾಲ್ಕು ದಿನಗಳೊಳಗೆ ಮೇಲುಸ್ತುವಾರಿ ಸಮಿತಿ ಮುಂದೆ ಹೋಗುವಂತೆ ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ನಾವು ತಡಮಾಡದೆ ಮೇಲುಸ್ತುವಾರಿ ಸಮಿತಿ ಮುಂದೆ ಹಾಜರಾಗಿ ರಾಜ್ಯದ ಸಂಕಷ್ಟದ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತೇವೆ ಎಂದು ಹೇಳಿದ್ದರು.
ಈ ವರ್ಷದ ಜೂನ್ ತಿಂಗಳಿನಿಂದ ಆಗಸ್ಟ್ ಅಂತ್ಯದ ವರೆಗಿನ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶ ಮಳೆಯ ತೀವ್ರ ಅಭಾವಕ್ಕೆ ತುತ್ತಾಗಿದೆ. ನಮ್ಮ ನಾಲ್ಕು ಜಲಾಶಯಗಳಾದ ಕೃಷ್ಣರಾಜ ಸಾಗರ, ಹಾರಂಗಿ, ಹೇಮವಾತಿ ಮತ್ತು ಕಬಿನಿಗೆ ಆಗಸ್ಟ್ ಅಂತ್ಯದ ವರೆಗೆ ಸಾಮಾನ್ಯ ವರ್ಷದಲ್ಲಿ 215.70 ಟಿಎಂಸಿ ನೀರು ಹರಿದುಬರಬೇಕಾಗಿತ್ತು. ಆದರೆ ಮಳೆಯ ಅಭಾವದಿಂದಾಗಿ ಈ ವರ್ಷ ಕೇವಲ 114.66 ಟಿಎಂಸಿ ನೀರು ಮಾತ್ರ ಬಂದಿದೆ. ಆದರೆ, ತಮಿಳುನಾಡು ಸರ್ಕಾರ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 10 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 15,000 ಕ್ಯೂಸೆಕ್ಸ್ ನೀರು ಹರಿಸುವಂತೆ ಆದೇಶ ನೀಡಿದೆ.
► Follow us on – Facebook / Twitter / Google+