ಸಾರಿಗೆ ನೌಕರರ ಜೊತೆ ಸಂಘರ್ಷ ಬೇಡ, ಚರ್ಚೆ ಮಾಡಿ : ಕಾಂಗ್ರೆಸ್ ಆಗ್ರಹ
ಬೆಂಗಳೂರು, ಏ.8- ಮುಷ್ಕರ ನಿರತ ಸಾರಿಗೆ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಿವ ಬೆದರಿಕೆಯೊಡ್ಡುವ ಮೂಲಕ ಸಂಘರ್ಷಕ್ಕೆ ಹಾದಿ ಮಾಡಿಕೊಡುವ ಬದಲು ಕಾರ್ಮಿಕ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಿರಿ ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಈ ಕುರಿತಂತೆ ಬಸವಕಲ್ಯಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಕೊರೊನಾ ರೋಗದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆ ಕೆಎಸ್ಆರ್ಟಿಸಿ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆ ಎಂದು ಕಿಡಿಕಾರಿದ್ದಾರೆ.
ಕಳೆದ ಬಾರಿ ಕೆಎಸ್ಆರ್ಟಿಸಿ ನೌಕರರ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ.
ಕಾರ್ಮಿಕ ಸಂಘದ ನಾಯಕರ ಜೊತೆ ಕೂತು ಅವರ ಮನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡುವ ಮೂಲಕ ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.
ಕೆಎಸ್ಆರ್ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಕಾರಣ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಆರೋಪಿಸಿದ್ದಾರೆ.
ರಾಜ್ಯ ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್ಆರ್ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ, ಸಾರಿಗೆ ವ್ಯವಸ್ಥೆಯಿಲ್ಲದೆ ಕಷ್ಟ ನಷ್ಟಕ್ಕಿಡಾಗಿರುವ ಜನತೆಯನ್ನು ರಕ್ಷಿಸಬೇಕು. ಆಂತರಿಕ ತಿಕ್ಕಾಟ, ಅಸಾಮಥ್ರ್ಯ ಮತ್ತು ಭ್ರಷ್ಟಾಚಾರಗಳಿಂದಾಗಿ ಹಾದಿ ತಪ್ಪಿರುವ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ.
ಇದರ ವಿರುದ್ಧ ಸ್ಪಷ್ಟ ಸಂದೇಶವನ್ನು ಉಪಚುನಾವಣೆಯಲ್ಲಿ ಮತದಾರರು ನೀಡಲಿದ್ದಾರೆ ಎಂದು ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಕಾರ್ಮಿಕ ಸಂಘಟನೆಗಳ ಜೊತೆ ಚರ್ಚಿಸಿ ಸಮಸ್ಯೆ ಬಗೆ ಹರಿಸಬೇಕು. ಕಾರ್ಮಿಕ ವಿರೋ ಧೋರಣೆ ಸರಿಯಲ್ಲ ಎಂದು ಹೇಳಿದರು.