ಪೊಲೀಸರಿಗೆ ಖುಷಿ ಸುದ್ದಿ ನೀಡಿದ ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಸೆ.14- ಬಹುದಿನಗಳ ಬೇಡಿಕೆಯಂತೆ ಪೊಲೀಸರ ವೇತನವನ್ನು ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಮೊದಲ ಪಟ್ಟಿಯಲ್ಲಿ ಕೈ ಬಿಟ್ಟು ಹೋಗಿರುವ ಎಸ್ಐ, ಎಸಿಪಿ ದರ್ಜೆ ಅಧಿಕಾರಿಗಳು ಹಾಗೂ ಅಗ್ನಿಶಾಮಕ, ಬಂಧಿಖಾನೆ ಅಧಿಕಾರಿಗಳ ವೇತನ ಪರಿಷ್ಕರಣೆ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪೊಲೀಸರ ವೇತನ ಪರಿಷ್ಕರಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಪಟ್ಟಿಯಲ್ಲಿ ಎಸ್ಐ, ಎಸಿಪಿ ದರ್ಜೆಯ ಅಧಿಕಾರಿಗಳು, ಅಗ್ನಿಶಾಮಕ ಹಾಗೂ ಬಂಧಿಖಾನೆ ಅಧಿಕಾರಿಗಳ ವೇತನ ಪರಿಷ್ಕರಣೆ ಮಾಡಲಾಗಿಲ್ಲ. ಇವರಿಗೂ ಸಹ ಅನ್ವಯವಾಗದಂತೆ ಕ್ರಮ ಕೈಗೊಳ್ಳಬೇಕೆಂದು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.
ಇದೇ 20ರಂದು ಗೋವಾ ರಾಜಧಾನಿ ಪಣಜಿಯಲ್ಲಿ ಬಿಎಸ್ಪಿ ಕೌನ್ಸಿಲಿಂಗ್ ಸಭೆ ಕರೆಯಲಾಗಿದೆ. ಅದರಲ್ಲಿ ನಾನೂ ಕೂಡ ಭಾಗವಹಿಸುತ್ತೇನೆ. ರಾಜ್ಯದ ನಿಲುವು ಏನೆಂಬುದನ್ನು ಅಂದಿನ ಸಭೆಯಲ್ಲಿ ಸ್ಪಷ್ಟಪಡಿಸುತ್ತೇನೆ ಎಂದರು.
ಬಿಹಾರದ ಉಪ ಮುಖ್ಯಮಂತ್ರಿ ಸುಶೀಲ್ಕುಮಾರ್ ಮೋದಿ ಅವರು ಬಿಎಸ್ಪಿ ಕೌನ್ಸಿಲಿಂಗ್ ಸಭೆಯಲ್ಲಿ ಭಾಗವಹಿಸುವರು. ಬೇರೆ ಬೇರೆ ರಾಜ್ಯಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದು, ರಾಜ್ಯದ ಪರವಾಗಿ ನನ್ನನ್ನು ಪಾಲ್ಗೊಳ್ಳುವಂತೆ ಸೂಚಿಸಿದ್ದಾರೆ. ಹೀಗಾಗಿ ಅಂದು ನಾನು ಭಾಗವಹಿಸುತ್ತೇನೆ ಎಂದು ಹೇಳಿದರು.